ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿ ಪ್ರಾರಂಭಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಬಗ್ಗೆ ತಾಂತ್ರಿಕ ಸಮಿತಿಯ ವರದಿಯನ್ನು ಅಂಗೀಕರಿಸಲಾಗಿದ್ದು, ವೈಜ್ಞಾನಿಕ ಮೌಲ್ಯಮಾಪನದ ನಂತರ ಪರಿಣಾಮಕಾರಿ ಸಾಗಣೆ ಸಾಮರ್ಥ್ಯದ ಆಧಾರದ ಮೇಲೆ ಜಂಗಲ್ ಸಫಾರಿಗೆ ಹಸಿರು ನಿಶಾನೆ ನೀಡಲಾಗಿದೆ. ಸಮಿತಿಯ ಶಿಫಾರಸಿನ ಪ್ರಕಾರ ನಿಯಂತ್ರಿತ ರೀತಿಯಲ್ಲಿ ಜಂಗಲ್ ಸಫಾರಿ ನಡೆಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ರಾಜ್ಯದ‌ ಪ್ರವಾಸೋದ್ಯಮದಲ್ಲಿ ‘ನಮ್ಮ ಗೈಡ್’

ಕರ್ನಾಟಕವು ಪರಿಸರ ಪ್ರವಾಸೋದ್ಯಮದಲ್ಲಿ ಅಪಾರ ಸಾಮರ್ಥ್ಯ ಹೊಂದಿದ್ದು, ಸದಾ ಸುಸ್ಥಿರ ಪ್ರವಾಸೋದ್ಯಮ ಮಾದರಿ ಪಾಲಿಸಿಕೊಂಡು ಬಂದಿದೆ. ಇದು ಸ್ಥಳೀಯ ಉದ್ಯೋಗ ಮತ್ತು ಜೀವನೋಪಾಯದ ಅವಕಾಶಗಳ ಸೃಷ್ಟಿಗೆ ಸಹಾಯ ಮಾಡುತ್ತದೆ ಹಾಗೂ ಸ್ಥಳೀಯ ಆರ್ಥಿಕತೆಯನ್ನು ಉತ್ತೇಜಿಸಲು ನೆರವಾಗುತ್ತದೆ. ಪರಿಸರ ವ್ಯವಸ್ಥೆಯ ಸಮಗ್ರತೆಯನ್ನು ರಕ್ಷಿಸುವ ಜತೆಗೆ, ಪರಿಸರ ಪ್ರವಾಸೋದ್ಯಮವು ವನ್ಯಜೀವಿ ಸಂರಕ್ಷಣೆ, ಸ್ಥಳೀಯರ ಜೀವನೋಪಾಯ ಮತ್ತು ಪ್ರವಾಸಿಗರ ಉತ್ತಮ ಅನುಭವಕ್ಕೆ ಪೂರಕವಾದ ಪರಿಸರ ಪ್ರವಾಸೋದ್ಯಮಕ್ಕೆ ಕರ್ನಾಟಕ ಸರಕಾರ ಬದ್ಧವಾಗಿದೆ ಎಂದು ಸಿಎಂ ಕಚೇರಿಯ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.